ನವದೆಹಲಿ: ನವದೆಹಲಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. ಶಿವಕುಮಾರ್ ವೈಯಕ್ತಿಕವಾಗಿ ₹25 ಲಕ್ಷ ಮತ್ತು ಅವರ ಟ್ರಸ್ಟ್ ಮೂಲಕ ₹2 ಕೋಟಿ ದೇಣಿಗೆಯನ್ನು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ್ದಾರೆ ಎಂದು ಇ.ಡಿ. ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಅಕ್ರಮ ಹಣದ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಇ.ಡಿ. ವರದಿಯಲ್ಲಿ ತಿಳಿಸಲಾಗಿದೆ.
ಶಿವಕುಮಾರ್ ಅವರ ಹೆಸರನ್ನು ಇ.ಡಿ. ಆರೋಪಪಟ್ಟಿಯಲ್ಲಿ ಸೇರಿಸಲಾಗಿದ್ದರೂ, ಅವರನ್ನು ಆರೋಪಿಯಾಗಿ ಹೆಸರಿಸಲಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅವರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್)ಗೆ ಈ ಮೊತ್ತವನ್ನು ಪಾವತಿಸಿದ್ದಾರೆ ಎಂದು ಇ.ಡಿ. ದಾಖಲಿಸಿದೆ. ಶಿವಕುಮಾರ್ ತಮ್ಮ ಹೇಳಿಕೆಯಲ್ಲಿ ದೇಣಿಗೆ ನೀಡಿರುವುದನ್ನು ಒಪ್ಪಿಕೊಂಡಿದ್ದಾರೆ, ಆದರೆ ಯಂಗ್ ಇಂಡಿಯನ್ ಕಾರ್ಯಾಚರಣೆಯ ಬಗ್ಗೆ ತಮಗೆ ವಿವರವಿಲ್ಲ ಎಂದಿದ್ದಾರೆ. ಎಐಸಿಸಿ ಖಜಾಂಚಿ ಪವನ್ ಬನ್ಸಾಲ್ ಸೂಚನೆಯ ಮೇರೆಗೆ ಈ ದೇಣಿಗೆಯನ್ನು ನೀಡಿದ್ದೇನೆ ಎಂದು ಶಿವಕುಮಾರ್ ಇ.ಡಿ.ಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ನ ಮಾಲೀಕತ್ವವನ್ನು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಹೊಂದಿದೆ. ಈ ಕಂಪನಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಲಾ ಶೇಕಡ 38ರಷ್ಟು ಷೇರುಗಳನ್ನು ಹೊಂದಿದ್ದಾರೆ. ಈ ಪ್ರಕರಣದಲ್ಲಿ ₹2,000 ಕೋಟಿ ಬೆಲೆಯ ಎಜೆಎಲ್ ಆಸ್ತಿಗಳನ್ನು ಯಂಗ್ ಇಂಡಿಯನ್ ಸ್ವಾಧೀನಕ್ಕೆ ತೆಗೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಆರೋಪವನ್ನು ಇ.ಡಿ. ಮಾಡಿದೆ.
ಹಿನ್ನೆಲೆ :
ಈ ತನಿಖೆಯು 2014ರಲ್ಲಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ದಾಖಲಿಸಿದ ಖಾಸಗಿ ದೂರಿನಿಂದ ಆರಂಭವಾಯಿತು. ಸ್ವಾಮಿ ದೂರಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೋಡಾ, ದಿವಂಗತ ಕಾಂಗ್ರೆಸ್ ನಾಯಕರಾದ ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಸೇರಿದಂತೆ ಯಂಗ್ ಇಂಡಿಯನ್ ಕಂಪನಿಯ ವಿರುದ್ಧ ಕ್ರಿಮಿನಲ್ ಪಿತೂರಿಯ ಆರೋಪ ಮಾಡಲಾಗಿತ್ತು. 2021ರಲ್ಲಿ ಈ ದೂರನ್ನು ಪಟಿಯಾಲಾ ಹೌಸ್ ನ್ಯಾಯಾಲಯದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಪರಿಗಣಿಸಿದ ನಂತರ ಇ.ಡಿ. ತನಿಖೆ ಆರಂಭವಾಯಿತು. ಕಳೆದ ತಿಂಗಳು ಇ.ಡಿ. ಸೋನಿಯಾ, ರಾಹುಲ್ ಮತ್ತು ಇತರರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತು.







