ಡೆಹ್ರಾಡೂನ್: ಉತ್ತರಾಖಂಡ್ನಲ್ಲಿ 2022ರಲ್ಲಿ ನಡೆದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸ್ಥಳೀಯ ನ್ಯಾಯಾಲಯವು ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಚಿವರ ಪುತ್ರ ಪುಲ್ಕಿತ್ ಆರ್ಯನನ್ನ ಸೇರಿ ಮೂವರಿಗೆ ಶಿಕ್ಷೆ ವಿಧಿಸಲಾಗಿದೆ.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ರೀನಾ ನೆಗಿ ಅವರ ನೇತೃತ್ವದ ನ್ಯಾಯಾಲಯವು ಆರೋಪಿಗಳನ್ನು ಐಪಿಸಿ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶ), 120 ಬಿ (ಕ್ರಿಮಿನಲ್ ಪಿತೂರಿ), ಮತ್ತು 354 (ಮಹಿಳೆ ವಿರುದ್ಧ ಕ್ರಿಮಿನಲ್ ಶಕ್ತಿ ಬಳಕೆ) ಅಡಿಯಲ್ಲಿ ದೋಷಿಗಳೆಂದು ಘೋಷಿಸಿತು. ಪ್ರತಿ ಆರೋಪಿಗೆ 50,000 ರೂಪಾಯಿ ದಂಡ ವಿಧಿಸಲಾಗಿದ್ದು, ಅಂಕಿತಾ ಭಂಡಾರಿ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆರೋಪಿಗಳಿಗೆ ಆದೇಶಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸಿತ್ತು. ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ಆತನ ಇಬ್ಬರು ಉದ್ಯೋಗಿಗಳಾದ ಸೌರಭ್ ಭಾಸ್ಕರ್ ಮತ್ತು ಅಂಕಿತ ಗುಪ್ತಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು 97 ಸಾಕ್ಷ್ಯಗಳೊಂದಿಗೆ ಸುಮಾರು 500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಎರಡು ವರ್ಷ ಎಂಟು ತಿಂಗಳ ಕಾಲ ನಡೆದ ಕಠಿಣ ವಿಚಾರಣೆಯಲ್ಲಿ ಆರೋಪಿಗಳನ್ನು ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ಹಿನ್ನೆಲೆ
2022ರ ಸೆಪ್ಟೆಂಬರ್ 18ರಂದು ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ವನಾಂತರ ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಅಂಕಿತಾ ಭಂಡಾರಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಮೃತದೇಹವನ್ನು ಚೀಲಾ ಶಕ್ತಿ ಕಾಲುವೆಗೆ ಎಸೆಯಲಾಗಿತ್ತು. ಒಂದು ವಾರದ ಬಳಿಕ ಮೃತದೇಹ ಪತ್ತೆಯಾದಾಗ, ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.







