ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯ ಆರ್ಭಟದಿಂದ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆ.ಆರ್.ಎಸ್.) ಅಣೆಕಟ್ಟಿನಲ್ಲಿ ನೀರಿನ ಮಟ್ಟ 101 ಅಡಿಗೆ ಏರಿಕೆಯಾಗಿದೆ. ಇದೇ ವೇಳೆ, ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯವೂ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ 5-6 ದಿನಗಳಲ್ಲಿ ಕೇರಳದ ವಯನಾಡು ಮತ್ತು ಕೊಡಗಿನ ಕಾವೇರಿ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿದಿದೆ. ಕಳೆದ 6-7 ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಬೀಳುತ್ತಿರುವುದರಿಂದ ಕಾವೇರಿ ನದಿ ತುಂಬಿಹರಿದು ಜೀವಕಳೆ ಪಡೆದಿದೆ. ಇದರ ಪರಿಣಾಮವಾಗಿ ಕೆ.ಆರ್.ಎಸ್. ಅಣೆಕಟ್ಟೆಗೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದ್ದು, ನೀರಿನ ಮಟ್ಟ 101 ಅಡಿಗೆ ಏರಿಕೆಯಾಗಿದೆ.
ಅಲ್ಲದೇ, ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯದ ಒಟ್ಟು ಸಾಮರ್ಥ್ಯ 2,284 ಅಡಿ ಇದ್ದು, ಪ್ರಸ್ತುತ 2,277.69 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ 15.74 ಟಿಎಂಸಿ ನೀರು ಇದ್ದು, ಒಟ್ಟು ಸಾಮರ್ಥ್ಯ 19.52 ಟಿಎಂಸಿ ಆಗಿದೆ. ಕಳೆದ ಮೂರು ದಿನಗಳಲ್ಲಿ 6 ಟಿಎಂಸಿ ನೀರು ಸಂಗ್ರಹವಾಗಿದ್ದು, ಪ್ರಸ್ತುತ 18,018 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಿರುವುದರಿಂದ ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗಿ, ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ.
ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18,000 ಕ್ಯೂಸೆಕ್ಗಿಂತಲೂ ಹೆಚ್ಚಾಗಿದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ 5,000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಯಾವುದೇ ಸಮಯದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಹರಿಸುವ ಸಾಧ್ಯತೆ ಇರುವುದರಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಕಬಿನಿ ನದಿ ಪಾತ್ರದಲ್ಲಿ ಮತ್ತು ನದಿಯ ಎರಡೂ ದಡದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. “ಜನರು ತಮ್ಮ ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು,” ಎಂದು ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್ ಕೋರಿದ್ದಾರೆ.







