ಬೆಂಗಳೂರು: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬರೋಬ್ಬರಿ 915 ಕಿ.ಮೀ. ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ಯೋಜನೆಯ ಕಾಮಗಾರಿಗಳು ಆರಂಭವಾಗಲಿವೆ. ಈ ಯೋಜನೆಯು ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ (ಕೆಶಿಪ್) ಅಡಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಸವಾರರಿಗೆ ಸುಗಮವಾದ ರಸ್ತೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಹೆದ್ದಾರಿಗಳ ಸ್ಥಿತಿ ಹದಗೆಟ್ಟಿದ್ದರಿಂದ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಈಗ ಸರ್ಕಾರದ ಈ ನಿರ್ಧಾರವು ರಸ್ತೆ ಸಂಚಾರವನ್ನು ಸುಲಭಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ರಾಜ್ಯದ ಹೆದ್ದಾರಿಗಳಲ್ಲಿ ಗುಂಡಿಗಳು, ಸಮರ್ಪಕವಲ್ಲದ ಮೇಲ್ಮೈ ಮತ್ತು ಕಿರಿದಾದ ರಸ್ತೆಗಳಿಂದಾಗಿ ವಾಹನ ಸವಾರರು ಹೈರಾಣಾಗಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ಸವಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ರಾಜ್ಯ ಹೆದ್ದಾರಿಗಳ ಸುಧಾರಣೆಗಾಗಿ ಮನವಿ ಸಲ್ಲಿಸಿದ್ದವರ ಒತ್ತಾಯಕ್ಕೆ ಮಣಿದಿದೆ
ರಾಜ್ಯ ಸರ್ಕಾರವು ಈಗಾಗಲೇ ರಸ್ತೆ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. 2025-26ರ ಬಜೆಟ್ನಲ್ಲಿ ಸಿದ್ದರಾಮಯ್ಯ ಅವರು 4,420 ಕಿ.ಮೀ. ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ 4,848 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. ಇದರಲ್ಲಿ 915 ಕಿ.ಮೀ. ರಾಜ್ಯ ಹೆದ್ದಾರಿಗಳ ಸುಧಾರಣೆಯೂ ಸೇರಿದೆ. ಇದರ ಜೊತೆಗೆ, 39 ದುರ್ಬಲ ಸೇತುವೆಗಳ ಪುನರ್ನಿರ್ಮಾಣಕ್ಕೆ 1,000 ಕೋಟಿ ರೂಪಾಯಿ ಮತ್ತು ಮಳೆಯಿಂದ ಹಾನಿಗೊಂಡ ರಸ್ತೆಗಳ ದುರಸ್ತಿಗೆ 20 ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.







