ಬೆಂಗಳೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತಗೆದುಕೊಂಡಿದೆ. ಕಮಲ್ ಹಾಸನ್ರ ಈ ಹೇಳಿಕೆಯಿಂದ ಕನ್ನಡಿಗರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕ್ಷಮೆ ಕೇಳುವಂತೆ ಒತ್ತಾಯಿಸಲಾಗಿತ್ತು. ಆದರೆ, ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ಮೆರೆದ ಕಮಲ್ಗೆ ಇದೀಗ ಕರ್ನಾಟಕದಲ್ಲಿ ತಮ್ಮ ಚಿತ್ರ ‘ಥಗ್ ಲೈಫ್’ ಬಿಡುಗಡೆಗೆ ತಡೆಯೊಡ್ಡಲಾಗಿದೆ. ಜೂನ್ 5ಕ್ಕೆ ರಾಜ್ಯದಲ್ಲಿ ಬಿಡುಗಡೆಯಾಗಬೇಕಿದ್ದ ಈ ಚಿತ್ರದ ವಿಚಾರಣೆಯನ್ನು ಹೈಕೋರ್ಟ್ ಜೂನ್ 10ಕ್ಕೆ ಮುಂದೂಡಿದ್ದು, ಚಿತ್ರದ ಬಿಡುಗಡೆಗೆ ಹಿನ್ನಡೆಯಾಗಿದೆ.
ಕಮಲ್ ಹಾಸನ್ರ ಹೇಳಿಕೆಯಿಂದ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯು ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಿರಾಕರಿಸಿತ್ತು. ಈ ತೀರ್ಮಾನವನ್ನು ಪ್ರಶ್ನಿಸಿ ಚಿತ್ರತಂಡವು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಕಮಲ್ ಹಾಸನ್, “ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ. ಪ್ರತಿಭಟನೆಗಳು ರಾಜಕೀಯ ಉದ್ದೇಶದಿಂದ ನಡೆಯುತ್ತಿವೆ,” ಎಂದು ಘೋಷಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಕಮಲ್ ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಜೂನ್ 4, 2025ರಂದು ಕರ್ನಾಟಕ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕಮಲ್ ಹಾಸನ್ಗೆ ಕಟುವಾದ ತಾಕೀತು ನೀಡಿದರು. “ಯಾವುದೋ ಒಂದು ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿತು ಎಂದು ಹೇಗೆ ಹೇಳಬಹುದು? ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ಹೇಳಲು ಕಮಲ್ ಹಾಸನ್ ಇತಿಹಾಸಕಾರರೇ? ಈ ರೀತಿಯ ಹೇಳಿಕೆಗಳಿಂದಾಗಿಯೇ ಈ ಪರಿಸ್ಥಿತಿ ಉಂಟಾಗಿದೆ. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿಯಲ್ಲ, ಸಾರ್ವಜನಿಕ ವ್ಯಕ್ತಿಯಾಗಿದ್ದಾರೆ. ಅವರು ಮೊದಲು ಕ್ಷಮೆ ಕೇಳಬೇಕು, ಆಗಲೇ ಅರ್ಜಿಯನ್ನು ಪರಿಗಣಿಸುತ್ತೇವೆ,” ಎಂದು ನ್ಯಾಯಾಲಯ ಆದೇಶಿಸಿತು. ಇದಕ್ಕೆ ಪ್ರತಿಕ್ರಿಯೆ ನೀಡಲು ಕಮಲ್ರ ವಕೀಲರು ಮಧ್ಯಾಹ್ನ 2:30ರವರೆಗೆ ಸಮಯ ಕೇಳಿದ್ದರು.
ವಿಚಾರಣೆಯ ಸಂದರ್ಭದಲ್ಲಿ, ಕಮಲ್ ಹಾಸನ್ರ ವಕೀಲರು ಚಿತ್ರದ ನಿರ್ಮಾಪಕರು ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆ ಮಾಡದಿರಲು ನಿರ್ಧರಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯೊಂದಿಗೆ ಚರ್ಚೆಗೆ ಸಿದ್ಧರಿರುವುದಾಗಿ ಹೇಳಿದರು. ಈ ಕಾರಣದಿಂದ ನ್ಯಾಯಾಲಯವು ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು.







