ಮೈಸೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢವಾಗಿ ಹೇಳಿದ್ದಾರೆ. ತಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಗ್ಗಟ್ಟಾಗಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿರೋಧಿಗಳ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮೈಸೂರು ವಿಮಾನನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರ ಸುಳ್ಳು ಆರೋಪಗಳನ್ನು ತಿರಸ್ಕರಿಸಿದರು ಮತ್ತು ರಾಜ್ಯ ಕಾಂಗ್ರೆಸ್ನ ಒಗ್ಗಟ್ಟಿನ ಬಗ್ಗೆ ದೃಢವಾದ ಸಂದೇಶವನ್ನು ನೀಡಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಬಿಜೆಪಿಯ ಆರೋಪವನ್ನು ಖಂಡಿಸಿದ ಸಿಎಂ, “ನಾವಿಬ್ಬರೂ ಒಗ್ಗಟ್ಟಾಗಿದ್ದೇವೆ. ಯಾರೇ ಏನೇ ಹೇಳಿದರೂ, ನಮ್ಮ ಸರ್ಕಾರದ ಸ್ಥಿರತೆಗೆ ಯಾವುದೇ ಧಕ್ಕೆ ಇಲ್ಲ. ಕಾಂಗ್ರೆಸ್ ಶಾಸಕರೆಲ್ಲರೂ ಒಟ್ಟಿಗೆ ಇದ್ದೇವೆ,” ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ರಾಜ್ಯ ಭೇಟಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಸುರ್ಜೆವಾಲಾ ಅವರು ಶಾಸಕರ ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಕೇಳಿ, ಪಕ್ಷದ ಕಾರ್ಯತಂತ್ರವನ್ನು ಬಲಪಡಿಸುವ ಕೆಲಸ ಮಾಡುತ್ತಾರೆ. ಇದು ಎಐಸಿಸಿಯ ರಾಜ್ಯ ಘಟಕದೊಂದಿಗೆ ಸಮಾಲೋಚನೆಯ ಭಾಗವಾಗಿದೆ,” ಎಂದರು.
ಬಿಜೆಪಿಯವರಿಂದ ಸಿದ್ದರಾಮಯ್ಯ ಈ ಬಾರಿಯ ದಸರಾ ಉದ್ಘಾಟನೆಯನ್ನು ನಡೆಸುವುದಿಲ್ಲ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, “ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತವರು. ಅವರು ಯಾವ ಮುಖದಿಂದ ಭವಿಷ್ಯ ನುಡಿಯುತ್ತಾರೆ?” ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.







