ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಡ್ಡಾಯ ನಿಯಮವಿದೆ. ಆದರೆ, ಬೆಂಗಳೂರಿನ 568 ಶಾಲೆಗಳು ಈ ನಿಯಮವನ್ನು ಉಲ್ಲಂಘಿಸಿ, ಮಕ್ಕಳ ಬೇಡಿಕೆಯಿದ್ದರೂ ಮೊಟ್ಟೆ ಬದಲಿಗೆ ಬಾಳೆಹಣ್ಣು ನೀಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ, ಶಾಲಾ ಮುಖ್ಯಸ್ಥರು, ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಸದಸ್ಯರು ಹಾಗೂ ಮೇಲ್ವಿಚಾರಣಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಂದಾಗಿದೆ.
ಪಿಎಂ ಪೋಷಣೆ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಗಳ ಪ್ರಕಾರ, 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಲ್ಲಿದೆ. ಮೊಟ್ಟೆಯನ್ನು ಸೇವಿಸಲು ಇಷ್ಟಪಡದ ಮಕ್ಕಳಿಗೆ ಬಾಳೆಹಣ್ಣು ನೀಡುವ ಆಯ್ಕೆಯನ್ನು ಕಲ್ಪಿಸಲಾಗಿದೆ. ಆದರೆ, ಕೆಲವು ಶಾಲೆಗಳ ಎಸ್ಡಿಎಂಸಿ ಸದಸ್ಯರು ಸ್ವಯಂ ನಿರ್ಧಾರ ಕೈಗೊಂಡು, ಮಕ್ಕಳು ಮೊಟ್ಟೆಗೆ ಬೇಡಿಕೆಯಿಟ್ಟಿದ್ದರೂ ಬಾಳೆಹಣ್ಣು ವಿತರಿಸುತ್ತಿರುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಯೋಜನೆಯ ನಿರ್ದೇಶಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅಜೀಂ ಪ್ರೇಮ್ಜಿ ಫೌಂಡೇಶನ್ನ ವರದಿಯನ್ನು ಆಧರಿಸಿ, ಶಿಕ್ಷಣ ಇಲಾಖೆ ಈ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಿದೆ. ಮಕ್ಕಳು ಮತ್ತು ಪೋಷಕರ ಬೇಡಿಕೆಗೆ ತಕ್ಕಂತೆ ಮಾತ್ರ ಆಹಾರ ವಿತರಣೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. “ಮೊಟ್ಟೆ ಸೇವನೆಗೆ ಬೇಡಿಕೆ ಇದ್ದರೂ ಬಾಳೆಹಣ್ಣು ನೀಡುವುದು ಯೋಜನೆಯ ಉದ್ದೇಶಕ್ಕೆ ವಿರುದ್ಧವಾಗಿದೆ. ಇಂತಹ ತೀರ್ಮಾನಗಳು ಮಕ್ಕಳ ಪೌಷ್ಟಿಕತೆಯ ಮೇಲೆ ಪರಿಣಾಮ ಬೀರುತ್ತವೆ,” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಉಲ್ಲಂಘನೆಯನ್ನು ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಮತ್ತು ತಂಡವು ಶಾಲೆಗಳಿಗೆ ಭೇಟಿ ನೀಡಿ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಚನೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ. ಜೊತೆಗೆ, ಈ ತಪ್ಪಿತಸ್ಥ ಶಾಲೆಗಳಿಗೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.
ಈ ಕುರಿತು ಕೆಲವು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದು, “ನಮ್ಮ ಮಕ್ಕಳಿಗೆ ಮೊಟ್ಟೆ ಬೇಕೆಂದು ಒತ್ತಾಯಿಸಿದ್ದರೂ ಶಾಲೆಯವರು ಬಾಳೆಹಣ್ಣು ನೀಡುತ್ತಿದ್ದಾರೆ. ಇದು ಸರಿಯಲ್ಲ,” ಎಂದು ಹೇಳಿದ್ದಾರೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, “ಕೆಲವು ಸಮುದಾಯದವರ ಆಕ್ಷೇಪದಿಂದಾಗಿ ಬಾಳೆಹಣ್ಣು ನೀಡಲಾಗುತ್ತಿದೆ,” ಎಂದು ಸಮಜಾಯಿಷಿ ನೀಡಿದ್ದಾರೆ. ಆದರೆ, ಇದು ನಿಯಮಗಳಿಗೆ ವಿರುದ್ಧವೆಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.







