ಕರ್ನಾಟಕ ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್ ಸಿ ಎಸ್ ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಒಟ್ಟು ₹42,017.51 ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಈ ಅನುದಾನದಲ್ಲಿ ₹11,896.84 ಕೋಟಿಯನ್ನು ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವರ್ಗಾಯಿಸಲು ಸರ್ಕಾರ ಯೋಜನೆ ರೂಪಿಸಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳ 2025-26ನೇ ಸಾಲಿನ ಕ್ರಿಯಾ ಯೋಜನೆಯ ಕುರಿತಾದ ನೋಡಲ್ ಏಜೆನ್ಸಿಗಳ ಸಭೆಯಲ್ಲಿ ಈ ಮಾಹಿತಿಯನ್ನು ಚರ್ಚಿಸಲಾಗಿದೆ.
ಈ ಸಭೆಯಲ್ಲಿ, ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಯುವನಿಧಿ, ಶಕ್ತಿ, ಮತ್ತು ಅನ್ನ ಭಾಗ್ಯ ಯೋಜನೆಗಳಿಗೆ ಈ ಅನುದಾನವನ್ನು ಬಳಸಿಕೊಳ್ಳುವ ಬಗ್ಗೆ ಒಮ್ಮತ ಸಾಧಿಸಲಾಗಿದೆ. ಈ ಯೋಜನೆಗಳು ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ, ಉಚಿತ ವಿದ್ಯುತ್, ಮಹಿಳೆಯರಿಗೆ ಆರ್ಥಿಕ ನೆರವು, ಉಚಿತ ಸಾರಿಗೆ, ಮತ್ತು ಆಹಾರ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 5, 2025ರಂದು ನಡೆಯಲಿರುವ ಎಸ್ಸಿ, ಎಸ್ಟಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆಗೆ ಅಂತಿಮ ಅನುಮೋದನೆ ನೀಡುವ ಕುರಿತು ಚರ್ಚೆ ನಡೆಯಲಿದೆ.
ಸಮಾಜ ಕಲ್ಯಾಣ ಇಲಾಖೆಯ ಮೂಲಗಳ ಪ್ರಕಾರ, ಈ ಕ್ರಿಯಾ ಯೋಜನೆಯು ಪರಿಶಿಷ್ಟ ಸಮುದಾಯಗಳಿಗೆ ಸಮಾನ ಅವಕಾಶಗಳನ್ನು ಸೃಷ್ಟಿಸುವ ಜೊತೆಗೆ, ರಾಜ್ಯದ ಸಾಮಾಜಿಕ-ಆರ್ಥಿಕ ರೂಪಾಂತರಕ್ಕೆ ಕೊಡುಗೆ ನೀಡಲಿದೆ.
ಈ ನಿರ್ಧಾರವು ಕೆಲವರಿಂದ ವಿವಾದಕ್ಕೆ ಒಳಗಾಗಿದೆ. ಕೆಲವು ವಿರೋಧಿಗಳು, SCSP ಮತ್ತು TSP ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವುದರಿಂದ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಸಮುದಾಯಗಳಿಗೆ ನೇರವಾಗಿ ಒದಗಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೊರತೆಯಾಗಬಹುದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ಕಾಂಗ್ರೆಸ್ನ ಪಂಚ ಗ್ಯಾರಂಟಿ ಯೋಜನೆ: ಅಭಿವೃದ್ಧಿಗೆ ಕಡಿವಾಣವೇ?
ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕವಾಗಿ ಹಿಂದುಳಿದವರಿಗೆ ಗಣನೀಯ ಬೆಂಬಲವನ್ನು ಒದಗಿಸಿವೆ. ಈ ಯೋಜನೆಗಳಿಗೆ SCSP-TSP ಅನುದಾನದಿಂದ ಹಣವನ್ನು ವರ್ಗಾಯಿಸುವುದರಿಂದ ಈ ಕಾರ್ಯಕ್ರಮಗಳ ತಾಕತ್ತು ಮತ್ತಷ್ಟು ಹೆಚ್ಚಲಿದೆ ಎಂದು ಸರ್ಕಾರ ಭಾವಿಸಿದೆ.
ಆದರೆ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ಯಾವುದೇ ರೀತಿಯಾದ ತೊಂದರೆಯಾಗದಂತೆ ಗ್ಯಾರಂಟಿ ಯೋಜನೆಗಳನ್ನು ಮುನ್ನಡೆಸಿಕೊಂಡು ಹೋಗುತ್ತೆವೆ ಎಂದು ಹೇಳಿದ್ದರು, ಆದರೆ ಈಗ ಪ.ಜಾತಿ, ಪ.ಪಂಗಡ ಸಮುದಾಯಕ್ಕೆ ಮೀಸಲಿಡುವ ಹಣವನ್ನು ಸರ್ಕಾರ ಬೇರೆ ಯೋಜನೆಗಳಿಗೆ ಬಳಸಿಕೊಳ್ಳುವದು ಎಷ್ಟುಸರಿ? ಇದು ಅಗಸ್ಟ್ 5ರ ಸಭೆಯ ನಂತರ ಈ ಯೋಜನೆಯ ಕುರಿತು ಇನ್ನಷ್ಟು ಸ್ಪಷ್ಟತೆ ದೊರೆಯಲಿದೆ ಎಂದು ಕಾದು ನೋಡಬೇಕಾಗಿದೆ.







