ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಆರೋಪಿತ ಅಕ್ರಮಗಳ ಕುರಿತು ತನಿಖೆ ನಡೆಸಿದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಪಿ.ಎನ್. ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗವು ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವಿಸ್ತೃತ ವರದಿಯನ್ನು ಸಲ್ಲಿಸಿದೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸರ್ಕಾರದ ಪರವಾಗಿ ಈ ವರದಿಯನ್ನು ಸ್ವೀಕರಿಸಿದ್ದಾರೆ. ಈ ವರದಿಯನ್ನು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದ್ದು, ಅದರ ಆಧಾರದ ಮೇಲೆ ಸರ್ಕಾರ ಕಾನೂನಾತ್ಮಕ ಕ್ರಮಕ್ಕೆ ಮುಂದಾಗುವ ನಿರೀಕ್ಷೆಯಿದೆ.
ಪ್ರಕರಣದ ಹಿನ್ನೆಲೆ :
ಮುಡಾ ಹಗರಣವೂ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 50:50 ಯೋಜನೆಯಡಿ 3.16 ಎಕರೆ ಭೂಮಿಗೆ ಬದಲಾಗಿ ವಿಜಯನಗರದ ಉನ್ನತ ಪ್ರದೇಶದಲ್ಲಿ 14 ನಿವೇಶನಗಳನ್ನು ಹಂಚಿಕೆ ಮಾಡಿದ ಆರೋಪವು ಕೇಂದ್ರ ಬಿಂದುವಾಗಿದೆ. ಈ ಆರೋಪವು 2024ರ ಜುಲೈನಲ್ಲಿ ಬೆಳಕಿಗೆ ಬಂದಿದ್ದು, ಸಿದ್ದರಾಮಯ್ಯ ಅವರು ಈ ವಿಷಯವನ್ನು ರಾಜಕೀಯ ಪ್ರೇರಿತ ಎಂದು ಖಂಡಿಸಿದ್ದಾರೆ. ಅವರ ಪತ್ನಿಯ ಭೂಮಿಯನ್ನು ಮುಡಾದಿಂದ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಕ್ಕೆ ಪರಿಹಾರವಾಗಿ ಈ ನಿವೇಶನಗಳನ್ನು ನೀಡಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಈ ಹಂಚಿಕೆಯು ಬಿಜೆಪಿ ಆಡಳಿತದ ಅವಧಿಯಲ್ಲಿ (2021ರಲ್ಲಿ) ನಡೆದಿದ್ದು, ಯಾವುದೇ ಕಾನೂನುಬಾಹಿರ ಕೃತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
2024ರ ಜುಲೈ 15ರಂದು ರಾಜ್ಯ ಸರ್ಕಾರವು ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿತು. 2006ರಿಂದ 2024ರ ಜುಲೈ 15ರವರೆಗಿನ ಮುಡಾದ ಭೂಸ್ವಾಧೀನ, ಬಡಾವಣೆ ಅಭಿವೃದ್ಧಿ, ನಿವೇಶನ ಹಂಚಿಕೆ, ಡಿನೋಟಿಫಿಕೇಶನ್, ಮತ್ತು 50:50 ಯೋಜನೆಯಡಿಯ ಪರಿಹಾರ ನೀಡಿಕೆಯ ಕುರಿತು ತನಿಖೆ ನಡೆಸಲು ಆದೇಶಿಸಲಾಗಿತ್ತು.
ಇದನ್ನೂ ಓದಿ | ಮುಡಾ ಹಗರಣ: ಸುಪ್ರೀಂ ಕೋರ್ಟ್ನಿಂದ ಸಿಎಂ ಪತ್ನಿಗೆ ರಿಲೀಫ್
ಈ ಅವಧಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್, ಸಿದ್ದರಾಮಯ್ಯ, ಮತ್ತು ಬಸವರಾಜ ಬೊಮ್ಮಾಯಿ ಅವರ ಮುಖ್ಯಮಂತ್ರಿತ್ವದ ಅವಧಿಯಲ್ಲಿ ನಡೆದಿರಬಹುದಾದ ಅಕ್ರಮಗಳನ್ನು ಆಯೋಗವು ಪರಿಶೀಲಿಸಿದೆ.
ಈ ವರದಿಯ ಆಧಾರದ ಮೇಲೆ ಸರ್ಕಾರ ಕೈಗೊಳ್ಳುವ ಕ್ರಮಗಳು ರಾಜಕೀಯ ವಲಯದಲ್ಲಿ ಗಮನ ಸೆಳೆಯಲಿವೆ. ಈ ಪ್ರಕರಣವು ಕೇವಲ ಮುಡಾದ ಅಧಿಕಾರಿಗಳಿಗೆ ಮಾತ್ರವಲ್ಲದೆ, ಖಾಸಗಿ ಡೆವಲಪರ್ಗಳಿಗೂ ಸಂಕಷ್ಟ ತಂದೊಡ್ಡಬಹುದು ಎಂದು ತಿಳಿದುಬಂದಿದೆ.







