ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಕೊರತೆಯಿಂದ ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ, ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಅಕ್ರಮವಾಗಿ 15 ಟನ್ ಯೂರಿಯಾ ಸಾಗಿಸುತ್ತಿದ್ದ ಲಾರಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆಯು ರಾಜ್ಯದ ರೈತರಿಗೆ ಗೊಬ್ಬರ ಕೊರತೆಯ ಸಂಕಷ್ಟದ ಮಧ್ಯೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಕರ್ನಾಟಕದಲ್ಲಿ ಖಾರಿಫ್ ಋತುವಿನಲ್ಲಿ ಬಿತ್ತನೆ ಚಟುವಟಿಕೆಗಳು ಚುರುಕುಗೊಂಡಿವೆ. ಆದರೆ, ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ರಾಯಚೂರಿನಂತಹ ಕೆಲವು ಜಿಲ್ಲೆಗಳಲ್ಲಿ ರೈತರು ಕಾಳಸಂತೆಯಲ್ಲಿ ಯೂರಿಯಾ ಮಾರಾಟದ ಆರೋಪವನ್ನು ಮಾಡಿ ಪ್ರತಿಭಟನೆ ನಡೆಸಿದ್ದರು.
ಈ ಸಂದರ್ಭದಲ್ಲಿ, ಆಗಸ್ಟ್ 4ರಂದು, ನಂಜನಗೂಡಿನ ಗೋದಾಮಿನಿಂದ 330 ಚೀಲಗಳಲ್ಲಿ 15 ಟನ್ ಯೂರಿಯಾ ಗೊಬ್ಬರವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಲಾರಿಯನ್ನು ಬಂಡೀಪುರ ಚೆಕ್ಪೋಸ್ಟ್ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಸಾಗಾಟಕ್ಕೆ ಅಂತರರಾಜ್ಯ ಗೊಬ್ಬರ ಸಾಗಾಟದ ಅನುಮತಿ ಇರಲಿಲ್ಲ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಧ್ಯ ಈ ಘಟನೆಯು ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜನತಾ ದಳ (ಜಾತ್ಯಾತೀತ) ರಾಜ್ಯ ಘಟಕವು, “ಕಾಂಗ್ರೆಸ್ ಸರ್ಕಾರವು ರೈತರಿಗೆ ಗೊಬ್ಬರ ಒದಗಿಸಲು ವಿಫಲವಾಗಿದ್ದು, ಕೇಂದ್ರ ಸರ್ಕಾರದಿಂದ ಬಂದ ಯೂರಿಯಾವನ್ನು ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದೆ” ಎಂದು ಆರೋಪಿಸಿದೆ. “ರೈತ ಸಂಪರ್ಕ ಕೇಂದ್ರಗಳಲ್ಲಿ ಗೊಬ್ಬರಕ್ಕಾಗಿ ರೈತರು ದಿನಗಟ್ಟಲೆ ಕಾಯುತ್ತಿದ್ದರೂ, ಸರ್ಕಾರವು ಗೊಬ್ಬರವನ್ನು ಅಕ್ರಮವಾಗಿ ರಾಜ್ಯದಿಂದ ಹೊರಗೆ ಕಳುಹಿಸುತ್ತಿದೆ” ಎಂದು ಜೆಡಿಎಸ್ ಟೀಕಿಸಿದೆ.
ಇದನ್ನೂ ಓದಿ | ಯೂರಿಯಾ ಕೊರತೆಗೆ ಬಿಜೆಪಿಯೇ ಕಾರಣ: ಸಿದ್ದರಾಮಯ್ಯ ಕೇಂದ್ರಕ್ಕೆ ತಿರುಗೇಟು
ನಂಜನಗೂಡು ಪೊಲೀಸರು ಈ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಕಳ್ಳಸಾಗಣೆಯ ಹಿಂದಿನ ಜಾಲವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಕೇಂದ್ರದಿಂದ ಶೀಘ್ರದಲ್ಲಿ ಹೆಚ್ಚುವರಿ ಯೂರಿಯಾ ಪೂರೈಕೆಗೆ ಕೋರಿಕೆ ಸಲ್ಲಿಸಿದೆ. ರೈತರಿಗೆ ಸಮರ್ಪಕವಾಗಿ ಗೊಬ್ಬರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.







