ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಅಲೆಮಾರಿ ಸಮುದಾಯ ಮತ್ತು ಒಳಮೀಸಲಾತಿ ಹೋರಾಟಗಾರರು ವಿನೂತನ ರೀತಿಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಿ, ರಾಜ್ಯ ಸರಕಾರದ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ಮತ್ತು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್, ‘ನಾವು ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿ ಕೇಳುತ್ತಿಲ್ಲ. ಅಲೆಮಾರಿ ಸಮುದಾಯಗಳಿಗೆ ಪ್ರಾತಿನಿಧ್ಯದ ಆಧಾರದಲ್ಲಿ ಒಳಮೀಸಲಾತಿ ನೀಡಬೇಕು. ಎಲ್ಲರೂ ಶೇ.1ರಷ್ಟು ಮೀಸಲಾತಿ ಕೇಳುತ್ತಿದ್ದಾರೆ. ಆದರೆ ಅಲೆಮಾರಿ ಸಮುದಾಯಗಳಿಗೆ ಶೇ.2ರಷ್ಟು ಪ್ರತ್ಯೇಕ ಮೀಸಲಾತಿ ಕೊಡಬೇಕು. ಬಲಿಷ್ಠ ಸಮುದಾಯಗಳ ಒತ್ತಾಯಕ್ಕೆ ಹೆಚ್ಚು ಮೀಸಲಾತಿ ಕೊಡುವುದಲ್ಲ ಮೀಸಲಾತಿ ನೀಡಬೇಕಿರುವುದು. ಗ್ರಾಮ ಪಂಚಾಯತ್ ಸದಸ್ಯರೂ ಇಲ್ಲದಿರುವ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯಲ್ಲಿ ಸರ್ಕಾರದ ಹೊಸ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಅಲೆಮಾರಿ ಸಮುದಾಯಗಳು ಧರಣಿ ನಡೆಸಿವೆ. ನಾಗಮೋಹನ್ ದಾಸ್ ವರದಿಯ ಶಿಫಾರಸಿನಂತೆ ಶೇ.1ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದ್ದು, ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿಗಳ ಅಲೆಮಾರಿ ಸಮುದಾಯಗಳ ಸದಸ್ಯರು ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ವಿರೋಧಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಅವರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಆಯೋಗದ ಶಿಫಾರಸಿನಂತೆ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ– ‘ಎ’ ನಲ್ಲಿಯೇ ಇರಿಸಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡಬೇಕು. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಾಗೂ ಬಿ.ಆರ್.ಅಂಬೇಡ್ಕರ್ ಮತ್ತು ದಾರ್ಶನಿಕರ ಆಶಯದಂತೆ ಕಟ್ಟಕಡೆಯವರಿಗೆ ಮೀಸಲಾತಿ ಸಿಗಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಧರಣಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರು, ಸರ್ಕಾರದ ನಿರ್ಧಾರವು ಅಲೆಮಾರಿ ಸಮುದಾಯಗಳನ್ನು ಹಿಂದುಳಿದ ಸ್ಥಿತಿಯಲ್ಲಿಯೇ ಇರಿಸುತ್ತದೆ ಎಂದು ಆರೋಪಿಸಿದರು. ಅಹೋರಾತ್ರಿ ಧರಣಿ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ | ಎಸ್ಸಿ ಒಳಮೀಸಲಾತಿ: ಸಿದ್ಧರಾಮಯ್ಯ ಸರ್ಕಾರದ ಐತಿಹಾಸಿಕ ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲೆಮಾರಿ ಬುಡಕಟ್ಟುಗಳಿಗೆ ಪ್ರತ್ಯೇಕ ಆಯೋಗ ರಚಿಸುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದರು. ಆದರೆ, ಇನ್ನೂ ಕ್ರಮ ಕೈಗೊಳ್ಳದಿರುವುದು ಹೋರಾಟಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಸಂಖ್ಯೆ ಸುಮಾರು 73% ಇರಬಹುದು ಎಂದು ದ್ವಾರಕಾನಾಥ್ ಅಂದಾಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಲೆಮಾರಿ ಸಮುದಾಯಗಳ ಆಗ್ರಹ ನ್ಯಾಯಸಮ್ಮತವಾಗಿದೆ.







