ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದಿನಿಂದ (ಸೋಮವಾರ) ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸುವರ್ಣ ವಿಧಾನಸೌಧದ ಹೊರಗೆ ಚಳಿ ಇದ್ದರೂ, ಒಳಗೆ ಮತ್ತು ರಾಜಕೀಯ ಪಡಸಾಲೆಯಲ್ಲಿ ಕಾವು ಏರಿದೆ. ಇದಕ್ಕೆ ಪ್ರಮುಖ ಕಾರಣ, ವಿಧಾನ ಪರಿಷತ್ ಸದಸ್ಯ ಮತ್ತು ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಅಧಿವೇಶನಕ್ಕೂ ಮುನ್ನ ನೀಡಿರುವ ಸ್ಫೋಟಕ ಹೇಳಿಕೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿರುವಾಗಲೇ, “ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ,” ಎಂದು ಹೇಳುವ ಮೂಲಕ ಯತೀಂದ್ರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಾಳೆಯಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಯತೀಂದ್ರ ಹೇಳಿದ್ದೇನು?
ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕುರ್ಚಿ ಕದನದ ಬಗ್ಗೆ ಸ್ಪಷ್ಟನೆ ನೀಡಿದರು. “ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮತ್ತು ವಿರೋಧ ಪಕ್ಷಗಳ ಬಾಯಲ್ಲಿ ಚರ್ಚೆಯಾಗುತ್ತಿದೆಯೇ ಹೊರತು, ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದಿಲ್ಲ ಮತ್ತು ಅವರು ಅದಕ್ಕೆ ಒಪ್ಪಿಗೆಯನ್ನೂ ಸೂಚಿಸಿಲ್ಲ,” ಎಂದು ಸ್ಪಷ್ಟಪಡಿಸಿದರು.
ತಮ್ಮ ತಂದೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅರ್ಥದಲ್ಲಿ ಮಾತನಾಡಿದ ಯತೀಂದ್ರ, ಅಧಿವೇಶನದ ಸಂದರ್ಭದಲ್ಲಿ ಪಕ್ಷದ ಶಾಸಕರು ಮತ್ತು ನಾಯಕರು ಒಗ್ಗಟ್ಟಿನಿಂದ ಇರಬೇಕು ಎಂಬ ಸಂದೇಶವನ್ನೂ ರವಾನಿಸಿದರು.
ಅಧಿಕಾರ ಹಂಚಿಕೆ ಸೂತ್ರದ ಗೊಂದಲ:
ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದಲೂ ‘ಅಧಿಕಾರ ಹಂಚಿಕೆ’ ವಿಚಾರ ಚರ್ಚೆಯಲ್ಲಿದೆ. ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ, ನಂತರದ ಅವಧಿಗೆ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎನ್ನಲಾಗಿತ್ತು. ಈ ಅವಧಿ ಹತ್ತಿರ ಬರುತ್ತಿದ್ದಂತೆ ಡಿಕೆಶಿ ಬಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆದರೆ, ಸಿದ್ದರಾಮಯ್ಯ ಅವರ ಬಣವು “ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ” ಎಂದು ಪ್ರತಿಪಾದಿಸುತ್ತಲೇ ಬಂದಿದೆ. ಈಗ ಸ್ವತಃ ಸಿಎಂ ಪುತ್ರನೇ ಹೈಕಮಾಂಡ್ ಹೆಸರನ್ನು ಪ್ರಸ್ತಾಪಿಸಿ ಬದಲಾವಣೆ ಇಲ್ಲ ಎಂದು ಹೇಳಿರುವುದು ಡಿಕೆಶಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಇದನ್ನೂ ಓದಿ | ಡಿಕೆಶಿ ಸಿಎಂ ಆದರೆ ನನಗೆ ಮಂತ್ರಿಗಿರಿ ಬೇಡ; ಕೆ.ಎನ್. ರಾಜಣ್ಣ ಹೇಳಿಕೆ
ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಮುಡಾ ಹಗರಣ ಮತ್ತು ವಕ್ಫ್ ವಿವಾದವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷದೊಳಗೆ ನಾಯಕತ್ವದ ಗೊಂದಲವಿದ್ದರೆ ಅದು ವಿಪಕ್ಷಗಳಿಗೆ ಅಸ್ತ್ರವಾಗುತ್ತದೆ. ಹೀಗಾಗಿ, ಯತೀಂದ್ರ ಅವರ ಈ ಹೇಳಿಕೆಯು ಒಂದೆಡೆ ವಿಪಕ್ಷಗಳಿಗೆ ತಿರುಗೇಟು ನೀಡುವ ತಂತ್ರವಾಗಿದ್ದರೆ, ಇನ್ನೊಂದೆಡೆ ಸ್ವಪಕ್ಷದೊಳಗಿನ ಭಿನ್ನಮತೀಯರಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.







