ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಲಾದ ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14, 2025 ರಂದು ಲೋಕಾರ್ಪಣೆಗೊಳಿಸಿದರು. ಈ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ ಎಂದು ಗಡ್ಕರಿ ಘೋಷಿಸಿದರು. 473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ 2.44 ಕಿಲೋಮೀಟರ್ ಉದ್ದದ ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣ ಸಮಯವನ್ನು ಸುಮಾರು ಎರಡು ಗಂಟೆಗಳಷ್ಟು ಕಡಿಮೆ ಮಾಡಲಿದೆ, ಇದರಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗಣನೀಯ ಸೌಲಭ್ಯವಾಗಲಿದೆ.
ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ನಿತಿನ್ ಗಡ್ಕರಿ, “ಈ ಸೇತುವೆಯ ಭೂಮಿಪೂಜೆಯನ್ನು ನಾನೇ ನೆರವೇರಿಸಿದ್ದೆ. ಇದೀಗ ಲೋಕಾರ್ಪಣೆ ಮಾಡುವುದು ನನ್ನ ಸೌಭಾಗ್ಯ. ಸಿಗಂದೂರು ಚೌಡೇಶ್ವರಿ ದೇವಿಯ ಆರ್ಶಿವಾದದಿಂದ ಈ ಸೇತುವೆಯ ನಿರ್ಮಾಣ ಸಾಧ್ಯವಾಯಿತು” ಎಂದರು. ಈ ಸೇತುವೆಯು ಅಂಬಾರಗೋಡ್ಲು-ಕಳಸವಳ್ಳಿ ಮಾರ್ಗವನ್ನು ಸಂಪರ್ಕಿಸುವುದರ ಜೊತೆಗೆ, ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ಪ್ರಯಾಣವನ್ನು ಸುಗಮಗೊಳಿಸಲಿದೆ ಎಂದು ಅವರು ತಿಳಿಸಿದರು.
2018 ರಲ್ಲಿ ಗಡ್ಕರಿ ಅವರು ಈ ಸೇತುವೆಯ ಕಾಮಗಾರಿಗೆ ಚಾಲನೆ ನೀಡಿದ್ದರು, ಮತ್ತು 2020 ರ ಡಿಸೆಂಬರ್ನಲ್ಲಿ ಕಾಮಗಾರಿ ಆರಂಭವಾಯಿತು. ಕೊರೊನಾ ಸಾಂಕ್ರಾಮಿಕ ಮತ್ತು ಶರಾವತಿ ಹಿನ್ನೀರಿನ ಏರಿಳಿತಗಳಿಂದಾಗಿ ಆರಂಭಿಕ ಎರಡು ವರ್ಷಗಳಲ್ಲಿ ಕಾಮಗಾರಿ ನಿಧಾನವಾಗಿತ್ತು. ಆದರೆ, ನಂತರ ವೇಗ ಪಡೆದು, 2025 ರ ಜುಲೈಗೆ ಸೇತುವೆ ಪೂರ್ಣಗೊಂಡಿತು. ಈ ಸೇತುವೆಯು ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾಗಿದ್ದು, ರಾಜ್ಯದ ಮೊದಲ ತೂಗು ಸೇತುವೆಯಾಗಿದೆ.
ಗಡ್ಕರಿ ಅವರು ಕಾರ್ಯಕ್ರಮದಲ್ಲಿ ರಾಜ್ಯದ ಇತರ ಮೂಲಸೌಕರ್ಯ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದರು. “ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವನ್ನು ನಾವು ಮಾಡಿದ್ದೇವೆ. ಬೆಂಗಳೂರು-ಚೆನ್ನೈ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ಶೇ. 70 ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ 2025 ರೊಳಗೆ ಮುಕ್ತಾಯವಾಗಲಿದೆ. ಹುಬ್ಬಳ್ಳಿ-ಧಾರವಾಡ ರಸ್ತೆಯ ಕಾಮಗಾರಿಯು 2026 ರಲ್ಲಿ ಉದ್ಘಾಟನೆಯಾಗಲಿದೆ”. ಚಿತ್ರದುರ್ಗ-ಶಿವಮೊಗ್ಗ ರಸ್ತೆಯ ಕಾಮಗಾರಿಯು 2026 ರ ಫೆಬ್ರವರಿಯಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಇದನ್ನೂ ಓದಿ | ಸಿಗಂದೂರು ಸೇತುವೆ: ಲೋಕಾರ್ಪಣೆಗೆ ಕ್ಷಣಗಣನೆ, ಸಿದ್ದರಾಮಯ್ಯರಿಂದ ಅನಿರೀಕ್ಷಿತ ಪತ್ರ
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಮತ್ತು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಹರತಾಳು ಹಾಲಪ್ಪ ಉಪಸ್ಥಿತರಿದ್ದರು. ಸೇತುವೆಯ ಉದ್ಘಾಟನೆಯು ರಾಜಕೀಯ ವಿವಾದಕ್ಕೂ ಕಾರಣವಾಯಿತು, ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನದ ಕೊರತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಗಡ್ಕರಿ ಅವರು ಶಿಷ್ಟಾಚಾರ ಪಾಲನೆಯಾಗಿದೆ ಎಂದು ಸ್ಪಷ್ಟಪಡಿಸಿದರು.







