ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆಯೇ, ರಾಜಧಾನಿ ಢಾಕಾ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಶುಕ್ರವಾರ ಬೆಳಗಿನ ಜಾವದಿಂದಲೇ ಭಾರೀ ಹಿಂಸಾಚಾರ ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ.
ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡು ಸಿಂಗಾಪುರದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಉಸ್ಮಾನ್ ಹಾದಿ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಶಾಂತವಾಗಿದ್ದ ಬಾಂಗ್ಲಾದೇಶದ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ಮತ್ತೊಮ್ಮೆ ಬೂದಿ ಮುಚ್ಚಿದ ಕೆಂಡದಂತಾಗಿದೆ.
ಕೆಲವು ದಿನಗಳ ಹಿಂದೆ ಢಾಕಾದಲ್ಲಿ ಷರೀಫ್ ಉಸ್ಮಾನ್ ಹಾದಿ ಅವರ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ದುಷ್ಕರ್ಮಿಗಳ ಗುಂಪೊಂದು ಅವರನ್ನು ಗುರಿಯಾಗಿಸಿ ದಾಳಿ ನಡೆಸಿದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದರು. ಆರಂಭದಲ್ಲಿ ಢಾಕಾದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿತ್ತು. ಆದರೆ, ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಗುರುವಾರ ರಾತ್ರಿ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಗಿನ ಜಾವ ಸಾವಿನ ಸುದ್ದಿ ಹಬ್ಬುತ್ತಿದ್ದಂತೆ, ಢಾಕಾ ವಿಶ್ವವಿದ್ಯಾಲಯ ಮತ್ತು ಇತರೆ ಶಿಕ್ಷಣ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ‘ನಮಗೆ ನ್ಯಾಯ ಬೇಕು’ ಮತ್ತು ‘ಹಂತಕರಿಗೆ ಮರಣದಂಡನೆ ವಿಧಿಸಿ’ ಎಂಬ ಘೋಷಣೆಗಳು ಮುಗಿಲು ಮುಟ್ಟಿವೆ. ರೊಚ್ಚಿಗೆದ್ದ ಪ್ರತಿಭಟನಾಕಾರರು ಪ್ರಮುಖ ರಸ್ತೆಗಳಲ್ಲಿ ಟೈಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ವಾಹನ ಸಂಚಾರವನ್ನು ಸಂಪೂರ್ಣವಾಗಿ ತಡೆದಿದ್ದಾರೆ.
ನಗರದ ಪ್ರಮುಖ ಕೇಂದ್ರವಾದ ಶಾಬಾಗ್ ವೃತ್ತ, ಮೀರ್ಪುರ ಮತ್ತು ಗುಲ್ಶಾನ್ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಕಡೆಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಹಾಗೂ ಸಣ್ಣ ಪ್ರಮಾಣದ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ | ಆಸ್ಪತ್ರೆಗಳಲ್ಲಿ ರಾಜಕೀಯ ಬೇಡ: ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ!
ವಿದ್ಯಾರ್ಥಿಗಳ ಆಗ್ರಹವೇನು?
ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯು ಯೋಜಿತ ಸಂಚು ಎಂದು ವಿದ್ಯಾರ್ಥಿ ಒಕ್ಕೂಟಗಳು ಆರೋಪಿಸಿವೆ. “ನಮ್ಮ ನಾಯಕನ ಕೊಲೆಗೆ ಕಾರಣರಾದ ನಿಜವಾದ ಸೂತ್ರಧಾರಿಗಳನ್ನು 24 ಗಂಟೆಯೊಳಗೆ ಬಂಧಿಸಬೇಕು. ಕೇವಲ ದಾಳಿಕೋರರಲ್ಲ, ಇದರ ಹಿಂದಿರುವ ರಾಜಕೀಯ ಶಕ್ತಿಯನ್ನೂ ಬಯಲಿಗೆಳೆಯಬೇಕು,” ಎಂದು ವಿದ್ಯಾರ್ಥಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.







